ಕಲಬುರಗಿ ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಹಾಗೂ ಜಲಮೂಲಗಳ ಮೇಲೆ ಉಂಟಾಗಿರುವ ಗಂಭೀರ ಪರಿಣಾಮವನ್ನು ಪರಿಗಣಿಸಿ ಕೂಡಲೇ ಬರ ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ವಿವಿಧ ರೈತ ಸಂಘಟನೆಗಳು ಗುರುವಾರ ಕಲಬುರಗಿ ಬಂದ್ಗೆ ಕರೆ ನೀಡಿದವು. ಬಂದ್ಗೆ ಹಲವು ಸಂಘಟನೆಗಳು ಬೆಂಬಲ ಸೂಚಿಸಿದ ಹಿನ್ನೆಲೆಯಲ್ಲಿ ನಗರದ ಹಲವು ಪ್ರದೇಶಗಳಲ್ಲಿ ವ್ಯಾಪಾರ-ವಹಿವಾಟು ಸ್ಥಗಿತಗೊಂಡಿದ್ದು, ರೈತರು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಬಸ್ ನಿಲ್ದಾಣದ ಎದುರು ಸೇರಿದಂತೆ ನಗರದ ಪ್ರಮುಖ ಸ್ಥಳಗಳಲ್ಲಿ ರೈತ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.
ಬೆಳಗ್ಗಿನಿಂದಲೇ ರೈತರು ಪ್ರತಿಭಟನೆಯ ಕಣಕ್ಕಿಳಿದರು. ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದ ರೈತ ಮುಖಂಡರು, ವ್ಯಾಪಾರಸ್ಥರು ತಮ್ಮ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡುವ ಮೂಲಕ ಹೋರಾಟಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿದರು. ರೈತರ ಮನವಿಗೆ ಹಲವು ವ್ಯಾಪಾರಸ್ಥರು ಸ್ಪಂದಿಸಿ ಅಂಗಡಿಗಳನ್ನು ಮುಚ್ಚಿದರು. ಬಂದ್ನ ಪರಿಣಾಮ ನಗರದ ವಾಣಿಜ್ಯ ಚಟುವಟಿಕೆಗಳ ಮೇಲೂ ಪರಿಣಾಮ ಬೀರಿತು. ಕೇಂದ್ರ ಬಸ್ ನಿಲ್ದಾಣದಿಂದ ಹೊರಡುವ ಸಾರಿಗೆ ಬಸ್ಗಳ ಸಂಚಾರವೂ ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ಕೆಲಕಾಲ ಪರದಾಡುವ ಪರಿಸ್ಥಿತಿ ನಿರ್ಮಾಣವಾಯಿತು.
ಜಿಲ್ಲೆಯಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿರುವುದು ಕೃಷಿಕರ ಆತಂಕಕ್ಕೆ ಕಾರಣವಾಗಿದೆ. ಮಳೆ ಕೊರತೆಯಿಂದ ಬೆಳೆಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುವುದರ ಜೊತೆಗೆ, ಜಾನುವಾರುಗಳಿಗೆ ನೀರು ಮತ್ತು ಮೇವಿನ ಸಮಸ್ಯೆ ಎದುರಾಗುವ ಸಾಧ್ಯತೆಯೂ ಇದೆ. ಮತ್ತೊಂದೆಡೆ, ಕುಡಿಯುವ ನೀರಿನ ಮೂಲಗಳ ಮೇಲೂ ಒತ್ತಡ ಹೆಚ್ಚುತ್ತಿದೆ. ಬಾವಿ, ಕೆರೆ, ಹಳ್ಳ ಸೇರಿದಂತೆ ಹಲವು ಜಲಮೂಲಗಳು ಬತ್ತುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಬಹುದು ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ವಿಳಂಬ ಮಾಡದೆ ಜಿಲ್ಲೆಗೆ ಬರ ಅಧ್ಯಯನ ತಂಡಗಳನ್ನು ಕಳುಹಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ತಂಡಗಳು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸಿ, ಕಲಬುರಗಿಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಕೇವಲ ಬರ ಘೋಷಣೆ ಮಾಡುವುದಷ್ಟೇ ಅಲ್ಲದೆ, ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ತಕ್ಷಣದ ಆರ್ಥಿಕ ನೆರವು ನೀಡಬೇಕು ಎಂದು ರೈತ ಮುಖಂಡರು ಒತ್ತಾಯಿಸಿದರು.
ರೈತರ ಪ್ರಮುಖ ಬೇಡಿಕೆಗಳಲ್ಲಿ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು ಎಂಬುದು ಕೂಡ ಸೇರಿದೆ. ಮಳೆ ಕೊರತೆ ಮತ್ತು ಬೆಳೆ ನಷ್ಟದಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಪರಿಹಾರ ನೀಡಿದರೆ ಮಾತ್ರ ಅವರ ಕುಟುಂಬಗಳಿಗೆ ತಾತ್ಕಾಲಿಕ ನೆಮ್ಮದಿ ದೊರೆಯಲಿದೆ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ. ಇದೇ ವೇಳೆ ಬೆಳೆ ವಿಮೆ ಯೋಜನೆಯಿಂದ ವಂಚಿತರಾಗಿರುವ ಅರ್ಹ ರೈತರಿಗೆ ವಿಮಾ ಮೊತ್ತವನ್ನು ಶೀಘ್ರವಾಗಿ ಬಿಡುಗಡೆ ಮಾಡಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.
ಇದರ ಜತೆಗೆ ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಕಲಬುರಗಿ ಜಿಲ್ಲೆಯ ಪಾಲಿಗೆ ಲಭ್ಯವಾಗಬೇಕಿರುವ 15 ಟಿಎಂಸಿ ನೀರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂಬ ಬೇಡಿಕೆಯನ್ನೂ ರೈತರು ಮುಂದಿಟ್ಟಿದ್ದಾರೆ. ನೀರಿನ ಕೊರತೆಯಿಂದ ಕೃಷಿ ಮಾತ್ರವಲ್ಲದೆ ಕುಡಿಯುವ ನೀರಿನ ಸಮಸ್ಯೆಯೂ ಎದುರಾಗುವ ಸಾಧ್ಯತೆ ಇರುವುದರಿಂದ ಜಲಮೂಲಗಳ ಸಂರಕ್ಷಣೆ ಹಾಗೂ ನೀರಿನ ಲಭ್ಯತೆ ಖಚಿತಪಡಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಬೇಕು ಎಂದು ಅವರು ಹೇಳಿದ್ದಾರೆ.
ರೈತರ ಸಾಲ ಮನ್ನಾ ಮಾಡಬೇಕು ಎಂಬ ಬೇಡಿಕೆಯೂ ಪ್ರತಿಭಟನೆಯಲ್ಲಿ ಪ್ರಮುಖವಾಗಿ ಕೇಳಿಬಂದಿದೆ. ಬೆಳೆ ನಷ್ಟ ಹಾಗೂ ಮಳೆ ಕೊರತೆಯಿಂದ ಆದಾಯ ಕುಂಠಿತವಾಗಿರುವ ಸಂದರ್ಭದಲ್ಲಿ ಸಾಲದ ಹೊರೆ ರೈತರ ಸಂಕಷ್ಟವನ್ನು ಮತ್ತಷ್ಟು ಹೆಚ್ಚಿಸಿದೆ. ಹೀಗಾಗಿ ರೈತರ ಸಾಲದ ಸಮಸ್ಯೆಗೆ ಸರ್ಕಾರ ತಕ್ಷಣ ಪರಿಹಾರ ಒದಗಿಸಬೇಕು ಎಂದು ಸಂಘಟನೆಗಳು ಆಗ್ರಹಿಸಿವೆ. ಇದೇ ವೇಳೆ ಬಾಕಿ ಉಳಿದಿರುವ ವಯೋವೃದ್ಧರ ಪಿಂಚಣಿ ಹಣವನ್ನು ಕೂಡ ಶೀಘ್ರ ಬಿಡುಗಡೆ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
Kalaburagi, Karnataka: A district-wide bandh is being observed today demanding that Kalaburagi be declared drought-hit. Various farmer, Kannada and Dalit organisations are participating in the bandh, protesting alleged discrimination in crop damage compensation and crop… pic.twitter.com/r4nnun5j61
— IANS (@ians_india) August 20, 2026
ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ವಿವಿಧ ರೈತ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ನಗರದ ವಿವಿಧೆಡೆ ಪ್ರತಿಭಟನೆ ನಡೆಸಿದರು. ರೈತರ ಹೋರಾಟಕ್ಕೆ ಅಡತ್ ಮಾಲೀಕರ ಸಂಘ, ಹೋಟೆಲ್ ಹಾಗೂ ಬೇಕರಿ ಮಾಲೀಕರ ಸಂಘ ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ಸೂಚಿಸಿದವು. ಇದರಿಂದ ಬಂದ್ಗೆ ವ್ಯಾಪಕ ಬೆಂಬಲ ವ್ಯಕ್ತವಾಯಿತು.
ಪ್ರತಿಭಟನೆಯಲ್ಲಿ ಸಂಯುಕ್ತ ಹೋರಾಟ ಸಂಘಟನೆಯ ಶರಣಬಸಪ್ಪ ಮಮಶೆಟ್ಪಿ, ಮೌಲಾ ಮುಲ್ಲಾ, ಭೀಮಾಶಂಕರ ಮಾಡಿಯಾಳ, ಸಿದ್ದು ಎಸ್.ಎಲ್., ಕರೆಪ್ಪ ಕರೆಗೊಂಡ, ಗುರಣ್ಣಗೌಡ ಜೇವರ್ಗಿ, ಪದ್ಮಿನಿ ಕಿರಣಗಿ ಸೇರಿದಂತೆ ನೂರಾರು ರೈತರು ಭಾಗವಹಿಸಿದ್ದರು. ಸರ್ಕಾರ ಕೂಡಲೇ ರೈತರ ಬೇಡಿಕೆಗಳಿಗೆ ಸ್ಪಂದಿಸಿ ಬರ ಘೋಷಣೆ ಸೇರಿದಂತೆ ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಕಲಬುರಗಿಯ ಮಳೆ ಕೊರತೆಯ ಪರಿಸ್ಥಿತಿ ಮುಂದುವರಿದರೆ ಕೃಷಿ ಮತ್ತು ಕುಡಿಯುವ ನೀರಿನ ಸಮಸ್ಯೆ ಇನ್ನಷ್ಟು ತೀವ್ರವಾಗುವ ಆತಂಕವಿದ್ದು, ಸರ್ಕಾರದ ಮುಂದಿನ ಕ್ರಮಗಳತ್ತ ಇದೀಗ ಜಿಲ್ಲೆಯ ರೈತರು ಎದುರು ನೋಡುತ್ತಿದ್ದಾರೆ.