Mar 11, 2026 Languages : ಕನ್ನಡ | English

ಕರ್ನಾಟಕದ ಪಾಲಿನ ₹11,000+ ಕೋಟಿ ಎಲ್ಲಿ ಹೋಯಿತು? ಸಿಎಂ ಸಿದ್ದರಾಮಯ್ಯ ಬಿಚ್ಚಿಟ್ಟ ಸ್ಫೋಟಕ ಸತ್ಯ!!

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲು ಮತ್ತು ವಿಶೇಷ ಅನುದಾನದ ಹಂಚಿಕೆಯಲ್ಲಿ ತಾರತಮ್ಯವಾಗುತ್ತಿದೆ ಎಂಬ ಗಂಭೀರ ಆರೋಪವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ್ದಾರೆ. ಕರ್ನಾಟಕದ ಹಕ್ಕುಗಳನ್ನು ರಕ್ಷಿಸಲು ಮತ್ತು ಬಾಕಿ ಇರುವ ಸಾವಿರಾರು ಕೋಟಿ ರೂಪಾಯಿಗಳ ಅನುದಾನವನ್ನು ಪಡೆಯಲು ಸುಪ್ರೀಂಕೋರ್ಟ್ ಮೆಟ್ಟಿಲೇರುವುದು ಅನಿವಾರ್ಯವಾಗಬಹುದು ಎಂದು ಅವರು ಎಚ್ಚರಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ಕಾನೂನು ಸಮರದ ಇನ್-ಸೈಡ್ ಸ್ಟೋರಿ
ಸಿಎಂ ಸಿದ್ದರಾಮಯ್ಯ ಅವರ ಕಾನೂನು ಸಮರದ ಇನ್-ಸೈಡ್ ಸ್ಟೋರಿ

ಶಾಸಕರಿಗಾಗಿ ಆಯೋಜಿಸಲಾಗಿದ್ದ ಆಯವ್ಯಯ ಮತ್ತು ರಾಜಸ್ವ ನಿರ್ವಹಣೆಯ ಕುರಿತಾದ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಈ ಕಾನೂನು ಹೋರಾಟದ ಕುರಿತು ಸುಳಿವು ನೀಡಿದ್ದಾರೆ. ಮುಖ್ಯಮಂತ್ರಿಗಳ ಪ್ರಕಾರ, ಕೇಂದ್ರ ಸರ್ಕಾರವು ಬಿಜೆಪಿಯೇತರ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳ ಮೇಲೆ 'ಮಲತಾಯಿ ಧೋರಣೆ' ಅನುಸರಿಸುತ್ತಿದೆ.

15ನೇ ಹಣಕಾಸು ಆಯೋಗದ ಶಿಫಾರಸಿನ ಅನ್ವಯ ಕರ್ನಾಟಕಕ್ಕೆ ಬರಬೇಕಾದ ₹5,495 ಕೋಟಿ ವಿಶೇಷ ಅನುದಾನವನ್ನು ಕೇಂದ್ರ ಸರ್ಕಾರ ಈವರೆಗೆ ನೀಡಿಲ್ಲ. ಇದರ ಜೊತೆಗೆ ಪೆರಿಫೆರಲ್ ರಿಂಗ್ ರಸ್ತೆಗೆ ₹3,000 ಕೋಟಿ ಮತ್ತು ಕೆರೆಗಳ ಅಭಿವೃದ್ಧಿಗಾಗಿ ₹3,000 ಕೋಟಿ ಸೇರಿದಂತೆ ಒಟ್ಟಾರೆ ₹11,495 ಕೋಟಿ ಮೊತ್ತದ ಘೋಷಿತ ಅನುದಾನವು ಕೇಂದ್ರದಿಂದ ರಾಜ್ಯಕ್ಕೆ ಇನ್ನೂ ಬಂದಿಲ್ಲ. ರಾಜ್ಯದ ಮಹತ್ವಾಕಾಂಕ್ಷಿ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್‌ನಲ್ಲಿ ಘೋಷಿಸಲಾದ ₹5,300 ಕೋಟಿ ಹಣವೂ ಸಹ ಬಿಡುಗಡೆಯಾಗದೆ ಬಾಕಿ ಉಳಿದಿದೆ. ಇವೆಲ್ಲವೂ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯನ್ನುಂಟು ಮಾಡುತ್ತಿವೆ ಎಂಬುದು ಸರ್ಕಾರದ ವಾದವಾಗಿದೆ.

ಜಿಎಸ್‌ಟಿ ಕೌನ್ಸಿಲ್‌ನಲ್ಲಿ ಈ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ. ಏಕೆಂದರೆ ಜಿಎಸ್‌ಟಿ ಕೌನ್ಸಿಲ್‌ನಲ್ಲಿ ಬಿಜೆಪಿ ಆಡಳಿತವಿರುವ ರಾಜ್ಯಗಳ ಸಂಖ್ಯೆಯೇ ಹೆಚ್ಚಿದೆ. ರಾಜ್ಯ ಸರ್ಕಾರವು ಎಷ್ಟೇ ಪ್ರಬಲವಾದ ತಾರ್ಕಿಕ ವಾದಗಳನ್ನು ಮಂಡಿಸಿದರೂ, ಅಲ್ಲಿನ ಮತದಾನದ ಪ್ರಕ್ರಿಯೆಯಲ್ಲಿ ಬಿಜೆಪಿಯೇತರ ರಾಜ್ಯಗಳ ಧ್ವನಿ ಅಷ್ಟಾಗಿ ಪರಿಣಾಮ ಬೀರುತ್ತಿಲ್ಲ.

ಹೀಗಾಗಿ ರಾಜಕೀಯ ಮಾತುಕತೆಗಳಿಗಿಂತ ಕಾನೂನು ಹೋರಾಟವೇ ಸೂಕ್ತ ಎಂಬ ನಿರ್ಧಾರಕ್ಕೆ ಸರ್ಕಾರ ಬರುತ್ತಿದೆ. ಈ ಹಿಂದೆ ಬರ ಪರಿಹಾರದ ಹಣವನ್ನು ಪಡೆಯಲು ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ನ್ಯಾಯಾಲಯದ ಹಸ್ತಕ್ಷೇಪದ ನಂತರವಷ್ಟೇ ಕೇಂದ್ರವು ಬರ ಪರಿಹಾರದ ಹಣವನ್ನು ಬಿಡುಗಡೆ ಮಾಡಿತ್ತು. ಅದೇ ಯಶಸ್ಸನ್ನು ಮಾದರಿಯಾಗಿಟ್ಟುಕೊಂಡು ಈಗ ಬಾಕಿ ಇರುವ ವಿಶೇಷ ಅನುದಾನಗಳಿಗೂ ಸುಪ್ರೀಂಕೋರ್ಟ್ ಮೊಟ್ಟಿಲೇರಲು ರಾಜ್ಯ ಸರ್ಕಾರ ಗಂಭೀರವಾಗಿ ಪರಿಶೀಲನೆ ನಡೆಸುತ್ತಿದೆ.

ಸಾರಾಂಶದಲ್ಲಿ ಹೇಳುವುದಾದರೆ, ಕರ್ನಾಟಕವು ದೇಶದ ತೆರಿಗೆ ಸಂಗ್ರಹಣೆಯಲ್ಲಿ ಎರಡನೇ ಅತಿದೊಡ್ಡ ಕೊಡುಗೆ ನೀಡುವ ರಾಜ್ಯವಾಗಿದ್ದರೂ, ಪ್ರತಿಯಾಗಿ ಕೇಂದ್ರದಿಂದ ನಮಗೆ ಸಿಗುತ್ತಿರುವ ಪಾಲು ಬಹಳ ಕಡಿಮೆ ಎಂಬುದು ಸಿದ್ದರಾಮಯ್ಯ ಅವರ ದೂರು. ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳ ನಡುವೆ ಸಮಾನವಾದ ಹಂಚಿಕೆಯಾಗಬೇಕು. ಆದರೆ ರಾಜಕೀಯ ಕಾರಣಗಳಿಗಾಗಿ ಕರ್ನಾಟಕಕ್ಕೆ ಸಿಗಬೇಕಾದ ನ್ಯಾಯಯುತ ಪಾಲು ತಪ್ಪುತ್ತಿದೆ. ಆದ್ದರಿಂದ ತಜ್ಞರ ಸಲಹೆ ಪಡೆದು, ರಾಜ್ಯದ ಹಿತದೃಷ್ಟಿಯಿಂದ ಅತಿ ಶೀಘ್ರದಲ್ಲೇ ಸುಪ್ರೀಂಕೋರ್ಟ್‌ಗೆ ದಾವೆ ಹೂಡುವ ಬಗ್ಗೆ ಸರ್ಕಾರ ಅಂತಿಮ ತೀರ್ಮಾನ ಕೈಗೊಳ್ಳಲಿದೆ. ಇದು ಕೇಂದ್ರ ಮತ್ತು ರಾಜ್ಯಗಳ ನಡುವಿನ ಹಣಕಾಸಿನ ಸಂಬಂಧದ ಮೇಲೆ ದೊಡ್ಡ ಪರಿಣಾಮ ಬೀರಲಿದೆ.

Latest News