ರಾಜ್ಯದಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಹಾವಳಿಯ ವಿರುದ್ಧ ಧ್ವನಿ ಎತ್ತಿ, ಸಮಾಜದ ಸುರಕ್ಷತೆಗಾಗಿ ಸರ್ಕಾರ ಮಾಡಬೇಕಿದ್ದ ಕೆಲಸವನ್ನು ಮಾಡುತ್ತಿರುವವರನ್ನು ಬಂಧಿಸಿರುವುದಕ್ಕೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಹೌದು ಕಾಂಗ್ರೆಸ್ ಸರ್ಕಾರ ತನ್ನ ತುಷ್ಟೀಕರಣ ಮತ್ತು ಓಲೈಕೆ ರಾಜಕೀಯಕ್ಕಾಗಿ ಸಮಾಜ ಪರ ಹೋರಾಟಗಾರರನ್ನು ಗುರಿಯಾಗಿಸುತ್ತಿದೆ ಎಂದು ಆರೋಪಿಸಲಾಗಿದೆ.
ಹಿಂದೂಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಬಂಧನದ ವಿಚಾರದಲ್ಲಿ ಪ್ರತಿಕ್ರಿಯೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು, “ದುಷ್ಟ ಅಪರಾಧಿಗಳಿಗೆ ಅಭಯ ನೀಡುತ್ತಾ, ಸಮಾಜ ಪರ ಹೋರಾಟಗಾರರನ್ನು ಹತ್ತಿಕ್ಕುವ ದಮನಕಾರಿ ನೀತಿಯೇ ಈ ಭ್ರಷ್ಟ ಕಾಂಗ್ರೆಸ್ ಸರ್ಕಾರದ ಅಲಿಖಿತ ನಿಯಮವಾಗಿದೆ. ದೇಶದ ಭದ್ರತೆಗೆ ಸವಾಲಾಗಿರುವ ಅಕ್ರಮ ವಲಸಿಗರ ವಿರುದ್ಧ ಜಾಗೃತಿ ಮೂಡಿಸುತ್ತಿರುವ ಪುನೀತ್ ಕೆರೆಹಳ್ಳಿ ಅವರನ್ನು ಬಂಧಿಸಿರುವುದು ಖಂಡನೀಯ. ಇದು ಕಾಂಗ್ರೆಸ್ ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ಸಾಕ್ಷಿಯಾಗಿದೆ” ಎಂದು ಹೇಳಿದ್ದಾರೆ.
ಬಿಜೆಪಿ ಆರೋಪಿಸಿದಂತೆ, ಸಮಾಜದ ಸುರಕ್ಷತೆಗಾಗಿ ನಿಲ್ಲುವವರ ಮೇಲೆ ಪೊಲೀಸ್ ಬಲಪ್ರಯೋಗ ನಡೆಯುತ್ತಿದೆ. ಪ್ರಜಾಪ್ರಭುತ್ವ ವಿರೋಧಿ ನಡೆ ಅನುಸರಿಸುತ್ತಿರುವ ಸರ್ಕಾರ, ತನ್ನ ಪಕ್ಷಪಾತ ಧೋರಣೆಯಿಂದ ಜನರ ವಿಶ್ವಾಸ ಕಳೆದುಕೊಳ್ಳುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.
ಇನ್ನೊಂದೆಡೆ, ಮಹಿಳಾ ಸರ್ಕಾರಿ ಅಧಿಕಾರಿಗೆ ಅಸಭ್ಯವಾಗಿ ಬೈದು, ಜೀವ ಬೆದರಿಕೆ ಹಾಕಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ತಲೆಮರೆಸಿಕೊಂಡಿದ್ದರೂ, ಪೊಲೀಸರಿಗೆ ಆತನ ಪತ್ತೆ ಹಚ್ಚಲು ಸಾಧ್ಯವಾಗುತ್ತಿಲ್ಲ ಎಂಬುದನ್ನು ಬಿಜೆಪಿ ಉದಾಹರಿಸಿದೆ. “ಸ್ವಪಕ್ಷದ ಅಪರಾಧಿಗಳಿಗೆ ರಾಜಾತಿಥ್ಯ, ಸಮಾಜದ ಹಿತ ಬಯಸುವವರ ಮೇಲೆ ದಮನಕಾರಿ ನೀತಿ – ಇದೇ ಈ ಕಾಂಗ್ರೆಸ್ ಸರ್ಕಾರದ ನಾಚಿಕೆಗೇಡಿನ ಆಡಳಿತ ವೈಖರಿ” ಎಂದು ಬಿಜೆಪಿ ಆರೋಪಿಸಿದೆ.
ದುಷ್ಟ ಅಪರಾಧಿಗಳಿಗೆ ಅಭಯ ನೀಡುತ್ತಾ, ಸಮಾಜ ಪರ ಹೋರಾಟಗಾರರನ್ನು ಹತ್ತಿಕ್ಕುವ ದಮನಕಾರಿ ನೀತಿಯೇ ಈ ಭ್ರಷ್ಟ @INCKarnataka ಸರ್ಕಾರದ ಅಲಿಖಿತ ನಿಯಮವಾದಂತಿದೆ. ದೇಶದ ಭದ್ರತೆಗೆ ಸವಾಲಾಗಿರುವ ಅಕ್ರಮ ವಲಸಿಗರ ವಿರುದ್ಧ ಜಾಗೃತಿ ಮೂಡಿಸುತ್ತಿರುವ ಪುನೀತ್ ಕೆರೆಹಳ್ಳಿ ಅವರನ್ನು ಬಂಧಿಸಿರುವುದು ಖಂಡನೀಯ, ಇದು ಕಾಂಗ್ರೆಸ್ ಸರ್ಕಾರದ ಸರ್ವಾಧಿಕಾರಿ… pic.twitter.com/qfZurVA9Z9
— Vijayendra Yediyurappa (@BYVijayendra) January 17, 2026
ಹೌದು ರಾಜ್ಯ ಸರ್ಕಾರ ತನ್ನ ಪಕ್ಷಪಾತ ಧೋರಣೆಯನ್ನು ಕೈಬಿಟ್ಟು, ಕಾನೂನು ಎಲ್ಲರಿಗೂ ಸಮಾನವಾಗಿರುವಂತೆ ನೋಡಿಕೊಳ್ಳಬೇಕು ಎಂದು ಬಿಜೆಪಿ ಒತ್ತಾಯಿಸಿದೆ. ಇಲ್ಲದಿದ್ದರೆ ಸಂವಿಧಾನಾತ್ಮಕ ಹಕ್ಕುಗಳ ದಮನದ ವಿರುದ್ಧ ಜನತೆ ಬೀದಿಗಿಳಿದು ಹೋರಾಡಲಿದ್ದಾರೆ ಎಂದು ಎಚ್ಚರಿಸಲಾಗಿದೆ. ಒಟ್ಟಿನಲ್ಲಿ, ಪುನೀತ್ ಕೆರೆಹಳ್ಳಿ ಬಂಧನದ ಪ್ರಕರಣವು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಕಾಂಗ್ರೆಸ್ ಸರ್ಕಾರದ ಧೋರಣೆ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ. ಮುಂದಿನ ದಿನಗಳಲ್ಲಿ ಈ ವಿಷಯ ಯಾವ ರೀತಿ ಬದ್ಲಾವಣೆ ಕಾಣುತ್ತದೆ ಎಂದು ಕಾದು ನೋಡಬೇಕು.